ತುಮಕೂರು: ಸಾಲ ವಸೂಲಿಗೆ ಕಿರುಕುಳ ನೀಡಿದರೆ ಈ ನಂಬರ್’ಗೆ ಕಾಲ್ ಮಾಡಿ: ಎಸ್.ಪಿ

1 min read

ಕಿರುಕುಳ ನೀಡಿದರೆ ಸಹಾಯವಾಣಿ ಕರೆ ಮಾಡಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್

Tumkurunews
ತುಮಕೂರು: ಸಾಲ ಮರು ಪಾವತಿಸುವಂತೆ ರೈತರಿಗೆ ಕಿರುಕುಳ ನೀಡಿದರೆ ಅಂತಹ ಹಣಕಾಸು ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ ಎಚ್ಚರಿಸಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ‌ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಮೂರು ದಿನಗಳಲ್ಲಿ ಜಿಲ್ಲೆಯ ತಿಪಟೂರು ತಾಲೂಕಿನ ಮಹಿಳೆ ಹಾಗೂ ಕೊರಟಗೆರೆ ತಾಲೂಕಿನ ಒಬ್ಬ ರೈತ ಸೇರಿದಂತೆ ಇಬ್ಬರು ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸಾಲ ಪಡೆದು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ವರದಿಯಾಗಿದೆ. ಯಾವುದೇ ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ಪಡೆದವರಿಂದ ವಸೂಲಾತಿಗಾಗಿ ಮನೆಗೆ ಭೇಟಿ ನೀಡಿ ಮಾನಸಿಕ ನಿಂದನೆ ಮಾಡಿದರೆ ಅಂಥವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ತುಮಕೂರು: ರೈತರಿಂದ ಸಾಲ ವಸೂಲಾತಿಗೆ ತಡೆ: ಜಿಲ್ಲಾಧಿಕಾರಿ ಆದೇಶ

ಇಂಥಹ ಪ್ರಕರಣಗಳು ಕಂಡು ಬಂದರೆ ಕೂಡಲೇ ಪೊಲೀಸ್ ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು, ಪೊಲೀಸ್ ಅಧಿಕಾರಿಗಳು ನೆರವಿಗೆ ಬರುತ್ತಾರೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕಳೆದಾರು ತಿಂಗಳಲ್ಲಿ ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ 4 ಪ್ರಕರಣಗಳ ಮೇಲೆ ಎಫ್‍ಐಆರ್ ದಾಖಲಾಗಿದೆ. ಮೈಕ್ರೋ ಫೈನಾನ್ಸ್ ಹಾಗೂ ಖಾಸಗಿ ಸಾಲದಾತರು ನೀಡಿದ ಸಾಲವನ್ನು ಮರುಪಾವತಿ ಮಾಡದಿರುವುದೇ ಈ ಆತ್ಮಹತ್ಯೆ ಪ್ರಕರಣಗಳಿಗೆ ಪ್ರಮುಖ ಕಾರಣವಾಗಿದೆ ಎಂದು ತನಿಖೆಯಿಂದ ತಿಳಿದು ಬಂದಿದೆ. ತುಮಕೂರು ನಗರದಲ್ಲಿ ಮೀಟರ್ ಬಡ್ಡಿ ದಂಧೆ ಸೇರಿದಂತೆ ತಿಪಟೂರು, ಕೆ.ಬಿ. ಕ್ರಾಸ್, ಚಿಕ್ಕನಾಯಕನಹಳ್ಳಿಯಲ್ಲಿ ಫೈನಾನ್ಸ್ ಕಂಪನಿಗಳು ನೀಡಿರುವ ಸಾಲ ವಸೂಲಾತಿ ಮಾಡಲು ಸಾಲಗಾರರೊಂದಿಗೆ ಅಮಾನವೀಯವಾಗಿ ನಡೆದುಕೊಳ್ಳುತ್ತಿರುವ ಬಗ್ಗೆ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ವರದಿಯಾಗಿವೆ ಎಂದು ತಿಳಿಸಿದರು.
ಸಾಲ ಮಾಡಿ ತೀರಿಸಲಾಗದವರಿಗೆ ಮನೋಸ್ಥೈರ್ಯ ತುಂಬುವ ಕೆಲಸವಾಗಬೇಕು. ಸಾಲದಿಂದ ಮುಕ್ತಿ ಹೊಂದಲು ಆತ್ಮಹತ್ಯೆಯೊಂದೇ ಮಾರ್ಗವಲ್ಲ ಎಂಬ ಬಗ್ಗೆ ಗ್ರಾಮೀಣ ಪ್ರದೇಶದ ಜನರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ತುಮಕೂರು: ಸಾಲಬಾಧೆ: ಒಂದೇ ಗ್ರಾಮದ ಮೂವರು ಮಹಿಳೆಯರು ಆತ್ಮಹತ್ಯೆ

About The Author

You May Also Like

More From Author

+ There are no comments

Add yours