ತುಮಕೂರು: ನಿವೇಶನ ರಹಿತರಿಗೆ ಸಿಹಿ ಸುದ್ದಿ ನೀಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್
Tumkurnews
ತುಮಕೂರು: ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಯಡಿ ಅರ್ಹರಿಗೆ 25000 ನಿವೇಶನಗಳ ಹಂಚಿಕೆಗಾಗಿ ಜಿಲ್ಲಾಡಳಿತದಿಂದ ಸುಮಾರು 2000 ಎಕರೆ ಪ್ರದೇಶವನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ತಿಳಿಸಿದರು.
ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆ ಮಾದರಿ ನೀತಿ ಸಂಹಿತೆ ಮುಕ್ತಾಯದ ನಂತರ ನಿವೇಶನ ಹಂಚಿಕೆಯ ಯೋಜನೆ ತಯಾರಿಸಬೇಕು,
ಮುಖ್ಯಮಂತ್ರಿಗಳ ಜನತಾ ದರ್ಶನ, ಜಿಲ್ಲಾ ಜನತಾ ದರ್ಶನ, ಸಕಾಲ ಸೇರಿದಂತೆ ಕಂದಾಯ ಇಲಾಖೆ ಯೋಜನೆಗಳಡಿ ಬಾಕಿ ಇರುವ ಅರ್ಜಿಗಳನ್ನು 3-4 ದಿನದೊಳಗೆ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ 23 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದ್ದು, ಪ್ರಸ್ತುತ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವುದರಿಂದ ಬತ್ತಿ ಹೋಗಿರುವ ಕೊಳವೆ ಬಾವಿ ಹಾಗೂ ಇಳುವರಿ ಕಡಿಮೆಯಾದ ಕೊಳವೆ ಬಾವಿಗಳಲ್ಲಿ ನೀರು ಮರು ಪೂರಣವಾಗಿರುವ ಸಾಧ್ಯತೆ ಇರುತ್ತದೆ. ನೀರಿನ ಸಮಸ್ಯೆ ಯಥಾ ರೀತಿ ಮುಂದುವರೆದಲ್ಲಿ ಹೊಸ ಕೊಳವೆ ಬಾವಿ ಕೊರೆಸುವ ಮುನ್ನ ಖಾಸಗಿ ಕೊಳವೆ ಬಾವಿಗಳಿಂದ ಬಾಡಿಗೆ ಆಧಾರದ ಮೇಲೆ ಪಡೆದು ನೀರು ಪೂರೈಕೆ ಮಾಡಲು ಆದ್ಯತೆ ನೀಡಬೇಕು ಎಂದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಗೌರವ ಕುಮಾರ್ ಶೆಟ್ಟಿ, ತಹಶೀಲ್ದಾರ್ ಸಿದ್ದೇಶ್, ತೋಟಗಾರಿಕೆ ಉಪನಿರ್ದೇಶಕ ಶಾರದಮ್ಮ, ಪಶು ವೈದ್ಯಕೀಯ ಇಲಾಖೆ ಉಪನಿರ್ದೇಶಕ ಡಾ: ಗಿರೀಶ್ ಬಾಬು ರೆಡ್ಡಿ, ಎಪಿಎಂಸಿ ಉಪನಿರ್ದೇಶಕ ರಾಜಣ್ಣ, ಸೇರಿದಂತೆ ಮತ್ತಿತರರು ಹಾಜರಿದ್ದರು.
+ There are no comments
Add yours