ತುಮಕೂರಿನಲ್ಲಿ ಯುವ ಕೌಶಲ್ಯ ತರಬೇತಿ ಕೇಂದ್ರ ಸ್ಥಾಪನೆ: ಸಚಿವ ಪ್ರಿಯಾಂಕ್ ಖರ್ಗೆ

1 min read

 

ಯುವಕರ ಕೌಶಲ್ಯ ಹೆಚ್ಚಿಸಲು ತರಬೇತಿ ಕೇಂದ್ರ ತೆರೆಯುವ ಚಿಂತನೆ: ಸಚಿವರಿಂದ ಸ್ಥಳ ಪರಿಶೀಲನೆ

Tumkurnews
ತುಮಕೂರು: ಜಿಲ್ಲೆಯಲ್ಲಿ ವಿವಿಧ ಪದವಿ ಹೊಂದಿದವರ ಕೌಶಲ್ಯವನ್ನು ಹೆಚ್ಚಿಸಲು ನಗರ ಕೇಂದ್ರ ಗ್ರಂಥಾಲಯದ ಮೂರನೇ ಮಹಡಿಯಲ್ಲಿ ಕೌಶಲ್ಯ ತರಬೇತಿ ಕೇಂದ್ರ ತೆರೆಯುವ ಚಿಂತನೆ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ನಗರ ಕೇಂದ್ರ ಗ್ರಂಥಾಲಯದಲ್ಲಿ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಸಚಿವರು, ವಿದ್ಯಾರ್ಥಿಗಳು ಉದ್ಯೋಗ ಪಡೆಯುವ ನಿಟ್ಟಿನಲ್ಲಿ ಶಿಕ್ಷಣದ ಜೊತೆಗೆ ಕೌಶಲ್ಯಗಳನ್ನು ಕಲಿಯುವುದು ಅನಿವಾರ್ಯವಾಗಿದೆ. ಜಿಲ್ಲೆಯಲ್ಲಿರುವ ಮೆಡಿಕಲ್ ಕಾಲೇಜು ಹಾಗೂ ಇಂಜಿನಿಯರ್ ಕಾಲೇಜುಗಳಿಂದ ಉತ್ತೀರ್ಣರಾಗಿ ಹೊರಬರುವ ವಿದ್ಯಾರ್ಥಿಗಳಿಗೆ ಉದ್ಯಮಶೀಲತಾಭಿವೃದ್ಧಿ ತರಬೇತಿ ನೀಡಿ ಅವರ ಕೌಶಲ್ಯವನ್ನು ಅಭಿವೃದ್ಧಿಪಡಿಸಿ ಉದ್ಯೋಗ ಪಡೆಯಲು ಅನುವು ಮಾಡಿಕೊಡಬೇಕೆಂಬ ಸದುದ್ದೇಶದಿಂದ ಕೌಶಲ್ಯ ತರಬೇತಿ ಕೇಂದ್ರವನ್ನು ತೆರೆಯಲು ಸರ್ಕಾರ ಉದ್ದೇಶಿಸಿದೆ ಎಂದು ತಿಳಿಸಿದರು.
ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ಸ್ಮಾರ್ಟ್ ಸಿಟಿ ಯೋಜನೆಯಡಿ ಕೇಂದ್ರ ಗ್ರಂಥಾಲಯದ 3ನೇ ಮಹಡಿಯಲ್ಲಿ ಸುಮಾರು 11,000 ಚದರ ಅಡಿ ವಿಸ್ತೀರ್ಣದ ಸುಸಜ್ಜಿತ ಕಟ್ಟಡದಲ್ಲಿ ಯುವ ಉದ್ಯೋಗಾಕಾಂಕ್ಷಿಗಳಿಗಾಗಿ ಕೌಶಲ್ಯ ತರಬೇತಿ ಕೇಂದ್ರವನ್ನು ತೆರೆಯುವ ಬಗ್ಗೆ ಸ್ಥಳೀಯ ಶೈಕ್ಷಣಿಕ ಸಂಸ್ಥೆಗಳು, ಕೈಗಾರಿಕೆಗಳೊಂದಿಗೆ ಚರ್ಚಿಸಿದ ನಂತರ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದೆಂದರು.

ತುಮಕೂರು: ಮಹಾನಗರ ಪಾಲಿಕೆಯಲ್ಲಿ ಹುದ್ದೆ: ಅರ್ಜಿ ಆಹ್ವಾನ
ಕೌಶಲ್ಯ ತರಬೇತಿ ಕೇಂದ್ರದಲ್ಲಿ ಪ್ರಮುಖವಾಗಿ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನದಲ್ಲಿ ಕೌಶಲ್ಯ ಹೆಚ್ಚಿಸುವ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವವರಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದೆ. 10ನೇ ತರಗತಿ, ಪಿಯುಸಿ, ಐಟಿಐ ಅನುತ್ತೀರ್ಣರಾದವರಿಗೂ ತರಬೇತಿ ನೀಡಲು ಯೋಜಿಸಲಾಗಿದೆ. ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಹೆಚ್ಚಿಸಲು ಈ ಕೇಂದ್ರ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಇದಕ್ಕೂ ಮುನ್ನ ಸಚಿವರು ಗ್ರಂಥಾಲಯದ ಮೊದಲ ಮಹಡಿಯಲ್ಲಿರುವ ಗ್ರಂಥಾಲಯದ ವಿಭಾಗ, ಡಿಜಿಟಲ್ ಗ್ರಂಥಾಲಯ ವಿಬಾಗ, ಮಕ್ಕಳ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮಕ್ಕಳ ಗ್ರಂಥಾಲಯ ವಿಭಾಗದಲ್ಲಿ ವಯೋಮಾನದ ಅಧಾರದಲ್ಲಿ ಮಕ್ಕಳಲ್ಲಿ ಕುತೂಹಲ ಹೆಚ್ಚಿಸುವ ಪುಸ್ತಕಗಳನ್ನು ಇಡಬೇಕೆಂದು ಸಲಹೆ ನೀಡಿದರಲ್ಲದೆ ಮಕ್ಕಳ ವಿಭಾಗದ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ತುಮಕೂರು: ಜಿಲ್ಲೆಯಲ್ಲಿ 190 ಡೆಂಗ್ಯೂ ಪ್ರಕರಣ ವರದಿ
ತರಬೇತಿ ಕೇಂದ್ರ ತೆರೆಯುವುದು ಹೇಳಿಕೆಯಾಗಿಯೇ ಉಳಿಯಬಾರದು. ಕಾರ್ಯರೂಪಕ್ಕೆ ತರಬೇಕೆಂಬ ಹಿನ್ನೆಲೆಯಲ್ಲಿ ಗೃಹ ಸಚಿವರ ಸಲಹೆ ಮೇರೆಗೆ ಈ ಭೇಟಿ ನೀಡಿದ್ದೇನೆ ಎಂದರು.
ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ನೀರಿನ ಘಟಕ ಕೆಟ್ಟು ನಿಂತಿವೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶುದ್ಧ ನೀರಿನ ಘಟಕದ ನಿರ್ವಹಣೆಯನ್ನು ಗ್ರಾಮ ಪಂಚಾಯತಿಗಳಿಗೆ ಹಸ್ತಾಂತರಿಸಲಾಗಿದ್ದು, ಇನ್ನು ಮುಂದೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ. ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಎಲ್ಲ ಶುದ್ಧ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿಡಲು ಈಗಾಗಲೇ ನೀಲನಕ್ಷೆ ಸಿದ್ಧಪಡಿಸಲಾಗಿದ್ದು, ಮುಂದಿನ ಐದಾರು ತಿಂಗಳೊಳಗಾಗಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದರು.

ತುಮಕೂರು: ಕೃಷಿ ಮಾಹಿತಿಗಾಗಿ ಸಹಾಯವಾಣಿ ಕೇಂದ್ರ: ಜಿಲ್ಲಾಧಿಕಾರಿಗಳಿಂದ ಚಾಲನೆ
ಗ್ರಂಥಾಲಯದ ವಾತಾವರಣದಲ್ಲಿ ತರಬೇತಿಯಂತಹ ಇನ್ನಾವುದೇ ಚಟುವಟಿಕೆಗಳಿಗೆ ಅವಕಾಶ ನೀಡಿದರೆ ವಿದ್ಯಾರ್ಥಿಗಳ ಓದಿಗೆ ತೊಂದರೆಯಾಗುವುದಿಲ್ಲವೇ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಿರುದ್ಯೋಗಿ ವಿದ್ಯಾರ್ಥಿಗಳ ಉದ್ಯೋಗಾವಕಾಶಕ್ಕಾಗಿಯೇ ತರಬೇತಿ ಕೇಂದ್ರ ತೆರೆಯಲು ಉದ್ದೇಶಿಸಲಾಗಿದೆಯೇ ಹೊರತು ವಾಣಿಜ್ಯ ಉದ್ದೇಶಕ್ಕಾಗಿ ಅಲ್ಲ. ಜಿಲ್ಲಾ ಸಚಿವರು, ಶೈಕ್ಷಣಿಕ ಸಂಸ್ಥೆಗಳು, ಕೈಗಾರಿಕೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದೆಂದು ತಿಳಿಸಿದರು.
ತುಮಕೂರು ನಗರದ ಭೇಟಿಗೂ ಮುನ್ನ ಸಚಿವರು ಜಿಲ್ಲೆಯ ಪಾವಗಡ ತಾಲ್ಲೂಕಿಗೆ ಭೇಟಿ ನೀಡಿ ತಾಲೂಕಿನ ಶುದ್ಧ ಕುಡಿಯುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗೆ ಪ್ರಾಯೋಗಿಕ ಚಾಲನೆಯನ್ನು ಪರಿವೀಕ್ಷಿಸಿದರು.

ಗೃಹಲಕ್ಷ್ಮಿ ಯೋಜನೆ: ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ ಸ್ಥಾಪನೆ
ಪಾವಗಡ ಹಾಗೂ ಚಳ್ಳಕೆರೆ ಭಾಗದ ಸುಮಾರು 1138 ಗ್ರಾಮಗಳಿಗೆ ನೀರೊದಗಿಸುವ 2300 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಬೃಹತ್ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಬೇಕೆಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಜ್ಯೋತಿಗಣೇಶ್, ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ದರ್ಶನ್, ಮಹಾ ನಗರ ಪಾಲಿಕೆ ಆಯುಕ್ತೆ ಬಿ.ವಿ ಆಶ್ವಿಜ, ಜಿಲ್ಲಾ ಪಂಚಾಯತ್ ಸಿಇಒ ಜಿ. ಪ್ರಭು, ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ರವೀಶ್, ಗ್ರಂಥಾಲಯ ಇಲಾಖೆ ಉಪನಿರ್ದೇಶಕ ಸರೋಜಮ್ಮ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

2026ರ ವೇಳೆಗೆ ತುಮಕೂರು-ರಾಯದುರ್ಗ ರೈಲ್ವೆ ಯೋಜನೆ ಸಮರ್ಪಣೆ: ಕೇಂದ್ರ ಸಚಿವ ವಿ.ಸೋಮಣ್ಣ

About The Author

You May Also Like

More From Author

+ There are no comments

Add yours