ತುಮಕೂರು: ನಿಷೇಧಾಜ್ಞೆ ಜಾರಿ: ನಿಷೇಧಾಜ್ಞೆ ಉಲ್ಲಂಘಿಸಿದರೆ ಬಂಧನ
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆದೇಶ
Tumkurnews
ತುಮಕೂರು: ನಗರದಲ್ಲಿ ಮೇ 10 ರಿಂದ 17ರವರೆಗೆ ವಿವಿಧ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಸುಸೂತ್ರವಾಗಿ ನಡೆಸಲು ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗದಿಂದ 2024ನೇ ಸಾಲಿನ ಅಧಿವೇಶನದ ಇಲಾಖಾ ಪರೀಕ್ಷೆ ಹಾಗೂ ವಿವಿಧ ಆಗಮ ಪ್ರಗಮ ಪ್ರವರ/ಪ್ರವೀಣ ಪ್ರಸಿದ್ದ ಪರೀಕ್ಷೆಗಳು ನಿಗಧಿತ ದಿನಾಂಕಗಳಂದು ನಡೆಯಲಿವೆ.
ನಗರದ ಅಶೋಕ ರಸ್ತೆ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಮೇ 10 ರಿಂದ 12ರವರೆಗೆ ಇಲಾಖಾ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ದಿನಗಳಂದು ಬೆಳಿಗ್ಗೆ 9.30 ರಿಂದ ಸಂಜೆ 4.30 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
ನಗರದ ಎಂಪ್ರೆಸ್ ಗರ್ಲ್ಸ್ ಹೈಸ್ಕೂಲ್ ಹಾಗೂ ಕುಣಿಗಲ್ ತಾಲ್ಲೂಕು ಎಡೆಯೂರಿನ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಸಂಸ್ಕೃತ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಮೇ 12 ರಿಂದ 17ರವರೆಗೆ ವಿವಿಧ ಆಗಮ ಪ್ರಗಮ ಪ್ರವರ, ಪ್ರವೀಣ ಪ್ರಸಿದ್ದ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ದಿನಗಳಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಕೆಲವು ಪ್ರಕರಣಗಳಲ್ಲಿ ದುರುದ್ದೇಶದಿಂದ ನಕಲಿ ಪ್ರಶ್ನೆಪತ್ರಿಕೆಗಳ ಫೋಟೋಗಳನ್ನು ತೆಗೆದು ವಾಟ್ಸ್ಆಪ್, ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಕಳುಹಿಸಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿ ಮಾಡಲು ಅವಕಾಶವಿರುವುದರಿಂದ ಪರೀಕ್ಷಾ ಮುಖ್ಯ ಅಧೀಕ್ಷಕರಿಗೆ ಕ್ಯಾಮರಾ ಹೊಂದಿರುವ ಸಾಮಾನ್ಯ ಮೊಬೈಲ್ ಇರಿಸಿಕೊಳ್ಳಲು ಅವಕಾಶವಿದೆ. ಉಳಿದ ಎಲ್ಲಾ ಪರೀಕ್ಷಾ ಸಿಬ್ಬಂದಿ, ವಿದ್ಯಾರ್ಥಿಗಳು ಮೊಬೈಲ್ ತರುವುದು/ಉಪಯೋಗಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.
ಈ ನಿಷೇಧಾಜ್ಞೆಯನ್ವಯ ಪರೀಕ್ಷೆ ನಡೆಯುವ ದಿನಾಂಕದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು. ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು ಕಂಡುಬಂದಲ್ಲಿ ಅವರ ವಿರುದ್ಧ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು. ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಹಾಗೂ ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
+ There are no comments
Add yours