ಕಾಲುಬಾಯಿ ಜ್ವರದ ವಿರುದ್ಧದ ಸಾಮೂಹಿಕ ಲಸಿಕಾ ಅಭಿಯಾನಕ್ಕೆ ಸಚಿವ ಪರಮೇಶ್ವರ್ ಚಾಲನೆ

0 min read

 

ತುಮಕೂರು: ಜಿಲ್ಲೆಯಾದ್ಯಂತ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಡಿಸೆಂಬರ್ ೨ರವರೆಗೆ ಹಮ್ಮಿಕೊಂಡಿರು ೮ನೇ ಸುತ್ತಿನ ಕಾಲುಬಾಯಿ ಜ್ವರದ ವಿರುದ್ಧದ ಸಾಮೂಹಿಕ ಲಸಿಕಾ ಅಭಿಯಾನಕ್ಕೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ಚಾಲನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಜಾನುವಾರುಗೆ ಪೂಜೆ ಸಲ್ಲಿಸಿ ಅಕ್ಕಿ ಬೆಲ್ಲ ತಿನ್ನಿಸಿದ ನಂತರ ಕಾಲುಬಾಯಿ ಜ್ವರದ ವಿರುದ್ಧದ ಲಸಿಕೆಯನ್ನು ಹಾಕುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರೈತರು ತಮ್ಮ ಮನೆ ಬಾಗಿಲಿಗೆ ಬರುವ ಪಶುಪಾಲನಾ ಹಾಗೂ ಪಶುವೈದ್ಯಕೀಯ ಇಲಾಖೆಯ ಅಧಿಕಾರಿಗಳೊಂದಿಗೆ ಸಹಕರಿಸಿ ಜಾನುವಾರುಗಳಿಗೆ ಕಾಲುಬಾಯಿ ಜ್ವರದ ವಿರುದ್ಧದ ಲಸಿಕೆಯನ್ನು ಹಾಕಿಸುವಂತೆ ಸಲಹೆ ನೀಡಿದರು.
ಪ್ರತಿಯೊಬ್ಬ ರೈತರು ಸಹ ಜಾನುವಾರುಗಳಿಗೆ ಈ ಲಸಿಕೆಯನ್ನು ಹಾಕಿಸುವ ಮೂಲಕ ತುಮಕೂರು ಜಿಲ್ಲೆಯನ್ನು ಕಾಲುಬಾಯಿ ಜ್ವರ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕು ಎಂದು ಅವರು ಹೇಳಿದರು.
ಅಭಿಯಾನದಲ್ಲಿ ಪ್ರತಿಯೊಂದು ಜಾನುವಾರುಗಳಿಗೆ ತಪ್ಪದೆ ಲಸಿಕೆ ಹಾಕಬೇಕು. ಲಸಿಕಾ ಕರ್ತವ್ಯದಲ್ಲಿ ಯಾವುದೇ ರೀತಿಯ ಅಸಡ್ಡೆ ಅಥವಾ ನಿರ್ಲಕ್ಷ÷್ಯ ತೋರಬಾರದು ಎಂದರು.
ಕಾಲುಬಾಯಿ ಜ್ವರದಂತಹ ಸಾಂಕ್ರಾಮಿಕ ರೋಗದಿಂದ ಜಾನುವಾರುಗಳನ್ನು ರಕ್ಷಿಸಿಕೊಳ್ಳುವಂತೆ ಪಶುಪಾಲಕರಲ್ಲಿ ಅರಿವು ಮೂಡಿಸಬೇಕು. ಸ್ಥಳೀಯ ಗ್ರಾಮ ಪಂಚಾಯಿತಿಗಳು ಈ ಅಭಿಯಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಶಿವಪ್ರಸಾದ್ ಮಾತನಾಡಿ, ಡಿಸೆಂಬರ್ ೨ರ ವರೆಗೆ ಕಾಲುಬಾಯಿ ಜ್ವರದ ವಿರುದ್ಧಧ ಸಾಮೂಹಿಕ ಲಸಿಕಾ ಅಭಿಯಾನವನ್ನು ಕೈಗೊಳ್ಳಲಾಗಿದೆ. ಜಿಲ್ಲೆಯ ೨೮೦೦ ಹಳ್ಳಿಗಳಲ್ಲಿ ೫೫೪ ಲಸಿಕೆದಾರರು ಕಾಲುಬಾಯಿ ಜ್ವರದ ವಿರುದ್ಧದ ಲಸಿಕೆಯನ್ನು ಉಚಿತವಾಗಿ ಹಾಕಲಾಗುವುದು. ಈ ಅಭಿಯಾನ ೧ ತಿಂಗಳ ಕಾಲ ನಡೆಯಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಜ್ಯೋತಿಗಣೇಶ್, ಸಿ.ಬಿ. ಸುರೇಶ್‌ಬಾಬು, ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ. ಸಿಇಓ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ ಹಾಗೂ ಪಶುಪಾಲನಾ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

You May Also Like

More From Author

+ There are no comments

Add yours