ಕಲ್ಪತರು ನಾಡಿನಲ್ಲಿ ಶ್ರದ್ಧಾ ಭಕ್ತಿಯ ಹನುಮ ಜಯಂತಿ
ತುಮಕೂರು: ಕಲ್ಪತರು ನಾಡಿನ ವಿವಿಧೆಡೆ ಮುಂಜಾನೆಯಿಂದಲೇ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿಸುವ ಮೂಲಕ ಹನುಮ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ನಗರದ ಇತಿಹಾಸ ಪ್ರಸಿದ್ಧ ಕೋಟೆ ಆಂಜನೇಯಸ್ವಾಮಿ ದೇವಾಲಯ, ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ದೇವಾಲಯ, ಶೆಟ್ಟಿಹಳ್ಳಿ ಗೇಟ್ನಲ್ಲಿರುವ ಅಭಯ ಆಂಜನೇಯ ಸ್ವಾಮಿ ದೇವಾಲಯ, ಬಿ.ಹೆಚ್. ರಸ್ತೆಯ ಆರ್.ಟಿ.ಒ ಕಚೇರಿ ಮುಂಭಾಗದಲ್ಲಿರುವ ವರಪ್ರಸಾದ ವೀರಾಂಜನೇಯ ಸ್ವಾಮಿ ದೇಗುಲ, ಬಟವಾಡಿ ಸಮೀಪದ ಭಕ್ತಾಂಜನೇಯಸ್ವಾಮಿ ದೇವಾಲಯ, ವಿದ್ಯಾನಗರದ ಪುಟ್ಟಾಂಜನೇಯ ಸ್ವಾಮಿ ದೇವಸ್ಥಾನ, ಹನುಂತಪುರದ ಬಯಲಾಂಜನೇಯಸ್ವಾಮಿ ದೇವಾಲಯ, ಬನಶಂಕರಿಯ ಮಾರುತಿ ದೇವಾಲಯ, ಮೆಳೇಕೋಟೆಯ ಅಭಯ ಆಂಜನೇಯಸ್ವಾಮಿ ದೇವಾಲಯ ಸೇರಿದಂತೆ ಜಿಲ್ಲೆಯ ವಿವಿಧೆಡೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಹನುಮ ನಾಮ ಸ್ಮರಣೆ, ವೇದ ಘೋಷಗಳು, ಭಜನೆಗಳು ಮೊಳಗಿದವು.
ಹನುಮ ಜಯಂತಿ ಪ್ರಯುಕ್ತ ಕೋಟೆ ಶ್ರೀ ಆಂಜನೇಯ ಸ್ವಾಮಿ ವೃತ್ತ, ಟೌನ್ ಹಾಲ್ ವೃತ್ತ ಸೇರಿದಂತೆ ಜಿಲ್ಲೆಯಾದ್ಯಂತ ಪಟ್ಟಣಗಳು, ಹೋಬಳಿ ಕೇಂದ್ರಗಳು ಕೇಸರಿ ಧ್ವಜಗಳಿಂದ ಕಂಗೊಳಿಸುತ್ತಿದ್ದು, ಕೋಟೆ ಶ್ರೀ ಆಂಜನೇಯಸ್ವಾಮಿ ಯುವಕರ ಬಳಗ ಹನುಮ ಜಯಂತಿ ಪ್ರಯುಕ್ತ ದೇವಾಲಯಕ್ಕೆ ಬರುವ ಭಕ್ತರಿಗೆ ಹೆಸರು ಬೇಳೆ, ಪಾನಕ, ಮಜ್ಜಿಗೆಯನ್ನು ಪ್ರಸಾದವಾಗಿ ವಿನಿಯೋಗಿಸಿತು.
ಹನುಮ ಜಯಂತಿ ಅಂಗವಾಗಿ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಮುಂಜಾನೆಯಿಂದಲೇ ಅಭಿಷೇಕ, ಹೋಮ ಹವನ, ಭಜನಾ ಕಾರ್ಯಕ್ರಮಗಳು ನಡೆದಿದ್ದು, ಆಂಜನೇಯಸ್ವಾಮಿ ವಿಗ್ರಹ ಮೂರ್ತಿಗಳಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು.
ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಪುರಾತನ ದೇವಸ್ಥಾನವಾಗಿದ್ದು, ಈ ದೇವಸ್ಥಾನದ ವಿಶೇಷತೆ ಎಂದರೆ ಗರ್ಭಗುಡಿಯ ಒಳಗೆ ಹನುಮನ ಎರಡು ಮೂರ್ತಿಗಳಿವೆ. ಈ ಪೈಕಿ ಒಂದು ಮೂರ್ತಿ ಪುರಾತನ ಕಾಲದ್ದಾಗಿದ್ದು, ಇನ್ನೊಂದು ಆ ಬಳಿಕ ಸ್ಥಾಪನೆ ಮಾಡಿದ ಮೂರ್ತಿಯಾಗಿದೆ. ಬೆಳಿಗ್ಗೆಯಿಂದಲೇ ಭಕ್ತಾದಿಗಳು ಆಂಜನೇಯಸ್ವಾಮಿ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಬೆಳಿಗ್ಗೆಯಿಂದಲೇ ಪಂಚಾಮೃತ ಅಭಿಷೇಕ, ಮಂಗಳಾರತಿ, ಪ್ರಾಕಾರೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆದವು. ಮಧ್ಯಾಹ್ನ ಕೋಟೆ ಆಂಜನೇಯಸ್ವಾಮಿಯ ರಥೋತ್ಸವ ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ ವೈಭವದಿಂದ ನಡೆಯಿತು.
ನಗರ ಸೇರಿದಂತೆ ಜಿಲ್ಲೆಯಾದ್ಯಂತ ಹನುಮನ ದೇವಾಲಯಗಳಲ್ಲಿ ಶ್ರೀರಾಮ ನಾಮ ಜಪ ಹಾಗೂ ಹನುಮ ನಾಮ ಸ್ಮರಣೆಗಳು ಭಕ್ತರಿಂದ ಮೊಳಗಿದವು.
ನಗರದ ವಿವಿಧೆಡೆ ಹನುಮನ ದೇವಾಲಯಗಳಲ್ಲಿ ಬೆಳಿಗ್ಗೆಯಿಂದ ಪೂಜಾ ವಿಧಿ ವಿಧಾನಗಳು ನೆರವೇರಿದ್ದು, ಭಕ್ತಾದಿಗಳಿಗೆ ವಿಶೇಷ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಭಕ್ತರು ಸಹ ಆಂಜನೇಯಸ್ವಾಮಿ ದೇವಾಲಯಗಳಿಗೆ ತೆರಳಿ ಸರದಿಯ ಸಾಲಿನಲ್ಲಿ ನಿಂತು ಸ್ವಾಮಿಯ ದರ್ಶನ ಪಡೆದು ಪುನೀತರಾದರು.




+ There are no comments
Add yours