ಮಂಗಳೂರು: ಕುತ್ತಾರು ಜಂಕ್ಷನ್ನಲ್ಲಿ ನಿರ್ಮಾಣವಾಗುತ್ತಿರುವ ಕೊರಗಜ್ಜ ವೃತ್ತದ ವಿಚಾರಕ್ಕೆ ಸಂಬಂಧಿಸಿದ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಘೇರಾವ್ ಹಾಕಿದ ಆರೋಪದಡಿ 11 ಮಂದಿಯ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಪೀಕರ್ ಖಾದರ್ ಅವರ ಭದ್ರತಾ ಸಿಬ್ಬಂದಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಮೇ 7ರಂದು ರಾತ್ರಿ ಕಾರ್ಯಕ್ರಮವೊಂದರಿಂದ ವಾಪಸ್ಸಾಗುತ್ತಿದ್ದ ವೇಳೆ ಕೆಲವರು ಸ್ಪೀಕರ್ ವಾಹನವನ್ನು ತಡೆದು ಕೊರಗಜ್ಜ ವೃತ್ತ ನಿರ್ಮಾಣದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ವಾಗ್ವಾದ ನಡೆಸಿದ್ದಾರೆ ಎನ್ನಲಾಗಿದೆ.
ಈ ವೇಳೆ ಭದ್ರತಾ ಸಿಬ್ಬಂದಿಗೆ ಅಡ್ಡಿಪಡಿಸಿ ಸ್ಪೀಕರ್ ಅವರನ್ನು ಸುತ್ತುವರಿದ ಆರೋಪ ಕೇಳಿಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಕುತ್ತಾರು ಜಂಕ್ಷನ್ನಲ್ಲಿ ನಿರ್ಮಾಣವಾಗುತ್ತಿರುವ ಹೊಸ ವೃತ್ತಕ್ಕೆ “ಕೊರಗಜ್ಜ” ಹೆಸರಿಡುವ ವಿಚಾರಕ್ಕೆ ಕೆಲವರ ವಿರೋಧ ವ್ಯಕ್ತವಾಗಿದ್ದು, ಇದೇ ವಿಚಾರಕ್ಕೆ ಉದ್ವಿಗ್ನತೆ ಉಂಟಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಸ್ಪೀಕರ್ ಯು.ಟಿ. ಖಾದರ್, ಸ್ಥಳೀಯರಲ್ಲಿ ಯಾವುದೇ ಗೊಂದಲ ಅಥವಾ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
