ವಿಪತ್ತು ನಿರ್ವಹಣೆ: ಸಹಾಯವಾಣಿ ಸ್ಥಾಪನೆ; ಎಲ್ಲಾ ಇಲಾಖೆಗಳ ಸಮನ್ವಯತೆಗೆ ಜಿಲ್ಲಾಧಿಕಾರಿ ಸೂಚನೆ
Tumkur news
ತುಮಕೂರು: ಮುಂಗಾರು ಅವಧಿಯಲ್ಲಿ ಸಾರ್ವಜನಿಕರ ಸುರಕ್ಷತೆ, ಆರೋಗ್ಯ ಹಾಗೂ ಮೂಲಸೌಕರ್ಯ ಸಂರಕ್ಷಣೆಗಾಗಿ ಇಲಾಖಾವಾರು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ವಿಪತ್ತು ನಿರ್ವಹಣೆ ಕುರಿತಂತೆ ತುರ್ತು ಸಂದರ್ಭದಲ್ಲಿ ಜಿಲ್ಲಾ ಸಹಾಯವಾಣಿ ಸಂಖ್ಯೆ 7304975519, 0816-2213402ಕ್ಕೆ ಕರೆ ಮಾಡಲು ತಿಳಿಸಿದರು.
ಮುಂಗಾರು ಹಂಗಾಮಿನ ಹಿನ್ನೆಲೆಯಲ್ಲಿ ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಸಮರ್ಪಕ ಲಭ್ಯತೆ ಖಚಿತಪಡಿಸಿಕೊಳ್ಳುವಂತೆ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಮಳೆಯಿಂದ ಉಂಟಾಗುವ ಹಾನಿಗಳ ಕುರಿತು ತಾಲ್ಲೂಕುವಾರು ಮಾಹಿತಿ ಸಂಗ್ರಹಿಸಿ, ಮಾನವ ಹಾನಿ, ಜಾನುವಾರು ಹಾನಿ, ಮನೆ ಹಾನಿ ಸೇರಿದಂತೆ ಕೃಷಿ ಮತ್ತು ತೋಟಗಾರಿಕೆ ಬೆಳೆ ಹಾನಿಗಳ ವಿವರಗಳನ್ನು ತ್ವರಿತವಾಗಿ ದಾಖಲಿಸಿ ಪರಿಹಾರ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸರಬರಾಜು ವ್ಯತ್ಯಯವಾಗದಂತೆ ಅಗತ್ಯ ಕ್ರಮವಹಿಸುವಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದ ಅವರು, ಸಾರ್ವಜನಿಕರಿಗೆ ಪೂರೈಕೆಯಾಗುವ ಕುಡಿಯುವ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸುವುದರ ಜೊತೆಗೆ, ಸರ್ಕಾರಿ ವಸತಿ ನಿಲಯಗಳು ಹಾಗೂ ಹಾಸ್ಟೆಲ್ಗಳಲ್ಲಿ ಕುಡಿಯುವ ನೀರಿನ ಮಾದರಿಗಳನ್ನು ಪರಿಶೀಲಿಸಿ, ಕ್ಲೋರಿನೇಷನ್ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ತಿಳಿಸಿದರು.
ಮಳೆಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಉಂಟಾಗದಂತೆ ಚರಂಡಿ ಮತ್ತು ತ್ಯಾಜ್ಯ ವಿಲೇವಾರಿ ಪ್ರದೇಶಗಳ ಸ್ವಚ್ಛತೆ, ಕ್ಲೀನಿಂಗ್ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಕಲುಷಿತ ನೀರು ಕುಡಿಯುವ ನೀರಿನ ಮೂಲಗಳಿಗೆ ಸೇರ್ಪಡೆಯಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಎಲ್ಲಾ ತಹಶೀಲ್ದಾರರು, ತಾಲೂಕು ಕಾರ್ಯ ನಿರ್ವಹಣಾಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇರಬೇಕು. ಮಳೆ ಮುನ್ಸೂಚನೆ ಇರುವುದರಿಂದ ಏನೇ ಅನಾಹುತಗಳಾದರು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನಾ ವರದಿಯನ್ನು ಪ್ರಾಧಿಕಾರಕ್ಕೆ ಕಳಿಸಿಕೊಡಲು ಸೂಚಿಸಿದರು.
ಸಭೆಯಲ್ಲಿ ಪ್ರಸ್ತುತ ಮುಂಗಾರು ಹಂಗಾಮಿನ ಋತುಮಾನ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಿ, ಜಿಲ್ಲೆಯಾದ್ಯಂತ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಹಾಗೂ ತುರ್ತು ಕ್ರಮಗಳ ಕುರಿತು ಚರ್ಚಿಸಲಾಯಿತು.
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ತಿಪ್ಪೇಸ್ವಾಮಿ, ತುಮಕೂರು ಉಪವಿಭಾಗದ ಅಧಿಕಾರಿ ನಹೀದಾ ಜಮ್ ಜಮ್, ಮಹಾನಗರ ಪಾಲಿಕೆ ಆಯುಕ್ತೆ ಶುಭ, ಯೋಜನಾ ನಿರ್ದೇಶಕ ಯೋಗಾನಂದ, ಡಿಎಚ್ಒ ಡಾ: ಚಂದ್ರಶೇಖರ್ ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
