ಜು.19ರಂದು ಚಿತ್ರದುರ್ಗದಲ್ಲಿ ರಾಷ್ಟ್ರೀಯ ಭೋವಿ ಜನೋತ್ಸವ: ಡಾ:ಎಂ.ರಾಮಪ್ಪ
Tumkur news
ತುಮಕೂರು: ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ 17ನೇ ಪಟ್ಟಾಭಿಷೇಕ ಹಾಗೂ 40ನೇ ಜನ್ಮ ವರ್ಧಂತ್ಯೋತ್ಸವ ಅಂಗವಾಗಿ ಜುಲೈ 19ರಂದು ಚಿತ್ರದುರ್ಗದಲ್ಲಿ ಬೃಹತ್ ರಾಷ್ಟ್ರೀಯ ಭೋವಿ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ: ಎಂ. ರಾಮಪ್ಪ ತಿಳಿಸಿದ್ದಾರೆ.
ನಗರದ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೋವಿ ಸಮುದಾಯದ ಅಭಿವೃದ್ಧಿ ದೃಷ್ಟಿಯಿಂದ ನಿಗಮದ ಮೂಲಕ ಕರ್ನಾಟಕ ಸರ್ಕಾರ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಸಮುದಾಯವನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನ ಮಾಡುತ್ತಿದೆ. ಈ ನಿಟ್ಟಿನಲ್ಲಿ ಭೋವಿ ಜನಸಮುದಾಯದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಾಗೂ ಸಮುದಾಯ ಸಂಘಟಿತರಾಗಬೇಕೆಂಬ ಉದ್ದೇಶದಿಂದ ಕುಲಗುರುವಿನ ಜನ್ಮ ಜಯಂತಿಯನ್ನು ಭೋವಿ ಜನೋತ್ಸವ ಹೆಸರಿನಲ್ಲಿ ಚಿತ್ರದುರ್ಗದಲ್ಲಿ ಆಚರಿಸಲಾಗುತ್ತಿದೆ ಎಂದು ಅವರು ವಿವರಿಸಿದರು.
ಈ ಕಾರ್ಯಕ್ರಮದಲ್ಲಿ ದೇಶಾದ್ಯಂತ ವಿವಿಧ ಹೆಸರುಗಳಿಂದ ಕರೆಯಲ್ಪಡುವ ಭೋವಿ ಸಮುದಾಯದ ಜನರು ಬೃಹತ್ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ ಅವರು ಸೇರಿದಂತೆ ರಾಜ್ಯದ ವಿವಿಧ ಸಚಿವರು, ಮುಖಂಡರು, ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಭೋವಿ ಸಮುದಾಯದ ಮಕ್ಕಳು ಎಸ್.ಎಸ್.ಎಲ್.ಸಿ., ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದು ಸಾಧನೆ ಮಾಡಿದ ಪ್ರತಿಭಾನ್ವಿತರನ್ನು ಸನ್ಮಾನ ಮಾಡಿ ಗೌರವಿಸಲಾಗುವುದು. ರಕ್ತದಾನ ಶಿಬಿರ, ಸಿದ್ದರಾಮೇಶ್ವರ ಕುರಿತು ವಿಚಾರ ಸಂಕಿರಣ, ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಜನಪ್ರತಿನಿಧಿಗಳು ಹಾಗೂ ಭೋವಿ ವಡ್ಡರ ಜನಾಂಗದ ಸಾಧಕರನ್ನು ಗೌರವಿಸುವುದು ಸೇರಿದಂತೆ ವಿವಿಧ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ಡಾ: ರಾಮಪ್ಪ ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಯೋಗೇಶ್, ಹೆಚ್.ಉಮೇಶ್, ಮಂಜುನಾಥ್, ಓಂಕಾರ್, ಇನ್ನಿತರರು ಉಪಸ್ಥಿತರಿದ್ದರು.
