ಮೇ 18 ರಿಂದ 25ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ-2: ನಿಷೇಧಾಜ್ಞೆ ಜಾರಿ
Tumkur news
ತುಮಕೂರು: ಜಿಲ್ಲೆಯಾದ್ಯಂತ 14 ಪರೀಕ್ಷಾ ಕೇಂದ್ರಗಳಲ್ಲಿ ಮೇ 18 ರಿಂದ 25ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ-2 ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆಯು ಮೇ 18 ರಿಂದ 25ರವರೆಗೆ(ಸರ್ಕಾರಿ ರಜೆ ಮತ್ತು ಪರೀಕ್ಷೆ ನಡೆಯದೆ ಇರುವ ದಿನಗಳನ್ನು ಹೊರತುಪಡಿಸಿ) ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ನಿಷೇಧಾಜ್ಞೆಯನ್ವಯ ಪರೀಕ್ಷೆ ನಡೆಯುವ ದಿನಾಂಕದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಕಂಪ್ಯೂಟರ್, ಸೈಬರ್, ಬೆರಳಚ್ಚು ಅಂಗಡಿಗಳನ್ನು ಮುಚ್ಚತಕ್ಕದ್ದು. ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಹಾಗೂ ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ.
ಕೆಲವು ಪ್ರಕರಣಗಳಲ್ಲಿ ದುರುದ್ದೇಶದಿಂದ ನಕಲಿ ಪ್ರಶ್ನೆಪತ್ರಿಕೆಗಳ ಫೋಟೋಗಳನ್ನು ತೆಗೆದು ವಾಟ್ಸ್ ಆಪ್ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಕಳುಹಿಸಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರಿಗೆ ಬೇಸಿಕ್ ಮೊಬೈಲ್ ಇರಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಉಳಿದ ಎಲ್ಲಾ ಪರೀಕ್ಷಾ ಸಿಬ್ಬಂದಿ, ವಿದ್ಯಾರ್ಥಿಗಳು ಮೊಬೈಲ್ ತರುವುದು, ಉಪಯೋಗಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.
ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು ಕಂಡುಬಂದಲ್ಲಿ ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2023ರಡಿ ಅಗತ್ಯ ಮುಂಜಾಗ್ರತಾ ಕ್ರಮ ಕ್ರಮಕೈಗೊಳ್ಳಲಾಗುವುದು ಎಂದು ಅವರು ಸೂಚಿಸಿದ್ದಾರೆ.
