ಜಿಲ್ಲೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಟಾಸ್ಕ್ಫೋರ್ಸ್: ಡಿಸಿಎಂ ಡಾ.ಜಿ.ಪರಮೇಶ್ವರ
Tumkur news
ತುಮಕೂರು: ಜಿಲ್ಲೆಯಲ್ಲಿ ಕೈಗೊಂಡಿರುವ ಕಾಮಗಾರಿಗಳ ಪರಿಶೀಲನೆಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಡಾಸ್ಕ್ ಫೋರ್ಸ್ ರಚಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾನುವಾರ ವಿವಿಧ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಸಮಯ ವ್ಯರ್ಥ ಮಾಡದೆ, ಮುಖ್ಯಮಂತ್ರಿ ಹಾಗೂ ತಾವು ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ತುಮಕೂರು ಜಿಲ್ಲೆಯ ಪ್ರಗತಿ ಪರಿಶೀಲನೆ ನಡೆಸಿದ್ದು, ಇನ್ನೆರಡು ವರ್ಷಗಳಲ್ಲಿ ಬಾಕಿ ಇರುವ ಎಲ್ಲ ಕಾಮಗಾರಿಗಳು ಪೂರ್ಣಗೊಳ್ಳಬೇಕಿದೆ ಹಾಗು ಆಗಲೇಬೇಕಿರುವ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪ್ರಗತಿ ಸಾಧಿಸಬೇಕಿದೆ. ಈ ನಿಟ್ಟಿನಲ್ಲಿ ಕಾಮಗಾರಿಗಳು ತ್ವರಿತವಾಗಿ ಆಗಬೇಕೆಂಬ ದೃಷ್ಟಿಯಲ್ಲಿ ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ಜಿಲ್ಲಾ ಟಾಸ್ಕ್ಫೋರ್ಸ್ ರಚಿಸಲಾಗುವುದು. ಈ ಸಮಿತಿ ಆಯಾ ಇಲಾಖೆಗಳು ಕೈಗೊಂಡ ಕಾಮಗಾರಿಗಳ ಪ್ರಗತಿಯನ್ನು ತಿಂಗಳಂತ್ಯದಲ್ಲಿ ಟಾಸ್ಕ್ಫೋರ್ಸ್ಗೆ ನೀಡಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲೆಯ ನೀರಾವರಿ ಯೋಜನೆಗಳಾದ ಎತ್ತಿನಹೊಳೆ, ಭದ್ರಾ ಮೇಲ್ದಂಡೆ ಹಾಗೂ ಹೇಮಾವತಿ ನಾಲಾ ಯೋಜನೆಗಳು ಪ್ರಗತಿಯಲ್ಲಿದ್ದು ಇವುಗಳ ಭೂಸ್ವಾಧೀನ ಪ್ರಕ್ತಿಯೆ ವಿವಿಧ ಹಂತದಲ್ಲಿವೆ ಈ ಬಗ್ಗೆ ಪ್ರತ್ಯೇಕವಾಗಿ ಸಭೆ ನಡೆಸಲು ಉದ್ದೇಶಿಸಲಾಗಿದೆ ಎಂದರು.
ಎತ್ತಿನಹೊಳೆ ಯೋಜನೆಯ ಭೂಸ್ವಾಧೀನ ಪೂರ್ಣಗೊಂಡಿದ್ದು ಜುಲೈನಲ್ಲಿ ನೀರು ಹರಿಸುವ ನಿರೀಕ್ಷೆ ಇತ್ತು. ಆದರೆ ಇನ್ನೂ ಕೆಲವೆಡೆ ಕಾಮಗಾರಿಗಳು ಆಗಬೇಕಿದೆ, ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ ಯೋಜನೆಯಡಿ ಭೂಸ್ವಾಧೀನ ಪ್ರಕ್ರಿಯೆಯನ್ನು ತಿಂಗಳೊಳಗೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.
ಇದಲ್ಲದೆ ವಿವಿಧ ಇಲಾಖೆ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ಎಲ್ಲ ಕಾಮಗಾರಿಗಳ ವರದಿಯನ್ನು ವಾರಾಂತ್ಯದಲ್ಲಿ ಜಿಲ್ಲಾಧಿಕಾರಿಯವರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ. ಒಟ್ಟಾರೆ ಜಿಲ್ಲೆಯ ಅಭಿವೃದ್ಧಿ ತ್ವರಿತವಾಗಬೇಕೆಂಬುದು ಪ್ರಮುಖ ಉದ್ದೇಶವಾಗಿದೆ ಎಂದು ಪರಮೇಶ್ವರ ತಿಳಿಸಿದರು.
130 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಜಿಲ್ಲಾಸ್ಪತ್ರೆ ಕಾಮಗಾರಿಗೆ ಸೋಮವಾರ ಹಳೆ ಕಟ್ಟಡ ತೆರವು ಕಾರ್ಯ ಆರಂಭವಾಗಲಿದೆ. 10 ಕೋಟಿ ರೂ. ವೆಚ್ಚದಲ್ಲಿ ಗುಬ್ಬಿ ವೀರಣ್ಣ ರಂಗಮಂದಿರ ಹೊಸದಾಗಿ ನಿರ್ಮಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಾಗಲೇ 3 ಕೋಟಿ ರೂ. ಸರ್ಕಾರ ನೀಡಿದೆ. ಜಿಲ್ಲೆಯ ಎಚ್ಎಎಲ್ ಕಾರ್ಖಾನೆ ತಮ್ಮ ಸಿಎಸ್ಆರ್ ಅಡಿಯಲ್ಲಿ 3 ಕೋಟಿ ರೂ ಹಾಗೂ ಹೆಚ್ಚುವರಿ ಸರ್ಕಾರದಿಂದ ಅನುದಾನ ಒದಗಿಸಲಾಗುವುದು. ಅಲ್ಲದೆ, 175 ಕೋಟಿ ರೂ. ವೆಚ್ಚದಲ್ಲಿ ತುಮಕೂರು ನಗರದಲ್ಲಿ ಮಹಾತ್ಮಗಾಂಧೀ ನಗರ ವಿಕಾಸ ಯೋಜನೆಯಡಿ ಕಾಮಗಾರಿ ಆರಂಭಿಸಲಾಗಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ಅಂತಾರಾಷ್ಟ್ರೀಯ ಈಜುಕೊಳ, ಅಂತಾರಾಷ್ಟ್ರೀಯ ಹಾಕಿ ಕ್ರೀಡಾಂಗಣ ಹೀಗೆ ತುಮಕೂರು ಕ್ರೀಡಾ ನಗರವಾಗಿ ಬೆಳಯಲಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಬೆಂಗಳೂರು ನಗರ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ನಿಕೇತ್ ರಾಜ್ ಎಂ. ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಜಿಲ್ಲಾ ಪೊಲೀಸ್ ಅಧೀಕ್ಷಕ ಅಶೋಕ್ ಕೆ.ವಿ. ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.
**
ಜಿಲ್ಲೆಯ ಎರಡು ರೈಲ್ವೆ ಯೋಜನೆಗಳ ಪೈಕಿ ತುಮಕೂರು-ದಾವಣಗೆರೆ ವೇಗವಾಗಿ ನಡೆಯುತ್ತಿದೆ ಆದರೆ ತುಮಕೂರು-ರಾಯದುರ್ಗ ಯೋಜನೆಯಲ್ಲಿ ತುಮಕೂರಿನಿಂದ ಪಾವಗಡವರೆಗೆ ಇರುವ ಕೆಲವು ತೊಡಕುಗಳನ್ನು ಸರಿಪಡಿಸಬೇಕಿದೆ. ಈ ಬಗ್ಗೆಯೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಪ್ರತ್ಯೇಕ ಸಭೆ ನಡೆಸಲಾಗುವುದು.
-ಡಾ.ಜಿ ಪರಮೇಶ್ವರ
