ಸೆ.21ರಿಂದ ಪಿಡಿಓಗಳ ಪ್ರತಿಭಟನೆ: ಗ್ರಾಪಂಗಳ ಹಲವು ಸೇವೆಗಳು ಬಂದ್
Tumkur news.in
ತುಮಕೂರು: ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯ್ತಿಗಳ ವಿವಿಧ ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ.21 ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ ಮತ್ತು ಹೋರಾಟವನ್ನು ಕರ್ನಾಟಕ ರಾಜ್ಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಹಮ್ಮಿಕೊಂಡಿದ್ದು, ಈ ಹೋರಾಟಕ್ಕೆ ಜಿಲ್ಲಾ ಮಟ್ಟದಲ್ಲಿ ಅಗತ್ಯ ಸಹಕಾರ ನೀಡವಂತೆ ಸಂಘದ ಜಿಲ್ಲಾ ಶಾಖೆ ವತಿಯಿಂದ ಜಿಪಂ ಸಿಇಓ ಬಿ.ವಿ. ಅಶ್ವಿಜ ಅವರಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ ಸುಬ್ಬರಾಜ ಅರಸ್ ವಿ.ಆರ್., ಖಜಾಂಚಿ ಮಂಜುನಾಥ ಎಸ್.ಎಸ್., ರಾಜ್ಯ ಪರಿಷತ್ ಸದಸ್ಯ ವೆಂಕಟೇಶ್ ಡಿ.ವಿ. ಹಾಗೂ ಉಪಾಧ್ಯಕ್ಷ ತೇಜಸ್ವಿ ಅವರನ್ನೊಳಗೊಂಡ ನಿಯೋಗ ನಗರದ ಜಿಲ್ಲಾ ಪಂಚಾಯ್ತಿ ಕಚೇರಿಯಲ್ಲಿ ಸಿಇಓರನ್ನು ಭೇಟಿ ಮಾಡಿ ಹೋರಾಟದ ಕುರಿತು ಮನವಿ ಸಲ್ಲಿಸಿದರು.
ಸಂಘವು ಸರ್ಕಾರದ ಮುಂದಿಟ್ಟಿರುವ ಪ್ರಮುಖ ಬೇಡಿಕೆಗಳು ಇದುವರೆಗೂ ಸಮರ್ಪಕವಾಗಿ ಈಡೇರದಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲಾ ಘಟಕಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ವಿಸ್ತೃತವಾಗಿ ಚರ್ಚಿಸಲಾಗಿದೆ. ಸದರಿ ಸಭೆಯಲ್ಲಿ ಕೈಗೊಂಡ ಸರ್ವಾನುಮತದ ನಿರ್ಣಯದಂತೆ, ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಸೆ.21 ರಿಂದ ರಾಜ್ಯವ್ಯಾಪಿ ಅನಿರ್ದಿಷ್ಟಾವಧಿ ಅಸಹಕಾರ ಚಳವಳಿ ಮತ್ತು ಹೋರಾಟವನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಪಿಡಿಓಗಳ ನ್ಯಾಯಸಮ್ಮತ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಅಗತ್ಯ ಕ್ರಮ ಕೈಗೊಳ್ಳುವುದರೊಂದಿಗೆ ಜಿಲ್ಲಾ ಮಟ್ಟದಲ್ಲಿ ನಡೆಯಲಿರುವ ಶಾಂತಿಯುತ ಹೋರಾಟಕ್ಕೆ ಅಗತ್ಯ ಸಹಕಾರ ನೀಡುವಂತೆ ಸಿಇಓರವರಿಗೆ ಕೋರಿದರು.
ರಾಜ್ಯದ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ಏಕಕಾಲದಲ್ಲಿ ಗ್ರೂಪ್ ಬಿ ಹುದ್ದೆಗಳಾಗಿ ಉನ್ನತೀಕರಿಸಬೇಕು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿಯಲ್ಲಿರುವ ಎಲ್ಲ ಗೊಂದಲಗಳನ್ನು ನಿವಾರಿಸಿ, ಅರ್ಹ ಅಧಿಕಾರಿಗಳಿಗೆ ವಿಳಂಬವಿಲ್ಲದೆ ಬಡ್ತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಗ್ರಾಮ ಪಂಚಾಯಿತಿಗಳಿಗೆ ಬಾಕಿಯಿರುವ 15ನೇ ಹಣಕಾಸು ಆಯೋಗದ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ಗ್ರಾಮ ಪಂಚಾಯಿತಿಗಳ ಸುಗಮ ಆಡಳಿತ ಮತ್ತು ಮೂಲ ಸೌಕರ್ಯ ನಿರ್ವಹಣೆಗೆ ಅಗತ್ಯ ಆರ್ಥಿಕ ನೆರವು ಒದಗಿಸಬೇಕು. ಗ್ರಾಮ ಪಂಚಾಯಿತಿಗಳ ಕುಡಿಯುವ ನೀರು ಮತ್ತು ನೈರ್ಮಲ್ಯ ಸೇವೆಗಳಿಗೆ ರಾಜ್ಯ ಬಜೆಟ್ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡಬೇಕು. ಜನಸಂಖ್ಯೆ ಮತ್ತು ವ್ಯಾಪ್ತಿಯ ಆಧಾರದ ಮೇಲೆ ಪ್ರತಿ ಗ್ರಾಮ ಪಂಚಾಯಿತಿಗೆ ನೈರ್ಮಲ್ಯ ಕಾರ್ಯಗಳಿಗಾಗಿ ವಾರ್ಷಿಕ 10 ಲಕ್ಷದಿಂದ 15 ಲಕ್ಷದವರೆಗೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮತ್ತು ನಿರ್ವಹಣೆಗಾಗಿ 25 ಲಕ್ಷದಿಂದ 35 ಲಕ್ಷದವರೆಗೆ ಪ್ರತ್ಯೇಕ ಅನುದಾನ ಒದಗಿಸಬೇಕು. ಈ ಕುರಿತು ವಿಸ್ತೃತ ವರದಿ ಸಿದ್ಧಪಡಿಸಿ, ಪೂರಕ ಬಜೆಟ್ ಮೂಲಕ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಗ್ರಾಮ ಪಂಚಾಯ್ತಿಗಳಲ್ಲಿ ಪದೋನ್ನತಿ, ನಿವೃತ್ತಿ, ಮರಣ ಹಾಗೂ ಇತರ ಕಾರಣಗಳಿಂದ ಖಾಲಿಯಾಗಿರುವ ಎಲ್ಲ ಸಿಬ್ಬಂದಿ ಹುದ್ದೆಗಳನ್ನು ತುರ್ತಾಗಿ ಭರ್ತಿ ಮಾಡಬೇಕು. ಪ್ರಸ್ತುತ ಇರುವ ಕ್ಲಿಷ್ಟಕರ ನೇಮಕಾತಿ ವಿಧಾನವನ್ನು ಸರಳೀಕರಿಸಿ, ನೇಮಕಾತಿಯ ಪ್ರತಿಯೊಂದು ಹಂತಕ್ಕೂ ಸ್ಪಷ್ಟ ಕಾಲಮಿತಿ ನಿಗದಿಪಡಿಸಬೇಕು. ಹುದ್ದೆ ಖಾಲಿಯಾದ ತಕ್ಷಣ ನಿಯಮಾನುಸಾರ ನೇಮಕಾತಿ ನಡೆಸುವಂತಹ ಶಾಶ್ವತ ವ್ಯವಸ್ಥೆಯನ್ನು ರೂಪಿಸಬೇಕು ಎಂದು ಸರ್ಕಾರವನ್ನು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ವಿ.ಬಿ.ಜಿ ರಾಮ್ಜಿ ಯೋಜನೆಯನ್ನು ನಿಯಮ ಬಾಹಿರವಾಗಿ ಹಾಗೂ ಒತ್ತಾಯಪೂರ್ವಕವಾಗಿ ಅನುಷ್ಠಾನಗೊಳಿಸುವುದನ್ನು ನಿಲ್ಲಿಸಬೇಕು. ಯೋಜನೆಯ ಅನುಷ್ಠಾನಕ್ಕೆ ಸ್ಪಷ್ಟ ಮಾರ್ಗಸೂಚಿ, ಕಾರ್ಯವಿಧಾನ, ಮಾದರಿ ಅಂದಾಜುಪಟ್ಟಿ ಮತ್ತು ಅಧಿಕಾರಿಗಳ ಜವಾಬ್ದಾರಿಗಳನ್ನು ನಿಗದಿಪಡಿಸಬೇಕು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮೇಲೆ ಅನ್ಯ ಇಲಾಖೆಗಳ ಕೆಲಸಗಳು ಹಾಗೂ ಹೆಚ್ಚುವರಿ ಜವಾಬ್ದಾರಿಗಳನ್ನು ನಿರಂತರವಾಗಿ ಹೇರುವುದನ್ನು ನಿಲ್ಲಿಸಿ, ಅನಗತ್ಯ ಕೆಲಸದ ಒತ್ತಡದಿಂದ ಮುಕ್ತಗೊಳಿಸಬೇಕು. ಇ ಸ್ವತ್ತು ತಂತ್ರಾಂಶದಲ್ಲಿರುವ ತಾಂತ್ರಿಕ ಮತ್ತು ಆಡಳಿತಾತ್ಮಕ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹರಿಸಿ, ತಂತ್ರಾಂಶವನ್ನು ಸರಳೀಕರಿಸುವ ಮೂಲಕ ಸಾರ್ವಜನಿಕರಿಗೆ ನಿಗದಿತ ಕಾಲಮಿತಿಯೊಳಗೆ ಸೇವೆ ಒದಗಿಸಲು ಅನುಕೂಲ ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಸೆ.21 ರಿಂದ ರಾಜ್ಯದ ಎಲ್ಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿಯನ್ನು ಪ್ರಾರಂಭಿಸಲಿದ್ದು, ಹೋರಾಟದ ಮೊದಲ ಮೂರು ದಿನಗಳಾದ ಸೋಮವಾರ, ಮಂಗಳವಾರ ಮತ್ತು ಬುಧವಾರ ಆಯಾ ಜಿಲ್ಲಾ ಪಂಚಾಯಿತಿ ಕಚೇರಿಗಳ ಮುಂಭಾಗದಲ್ಲಿ ಜಿಲ್ಲಾ ಮಟ್ಟದ ಪ್ರತಿಭಟನೆ ನಡೆಸಲಾಗುವುದು. ನಂತರ ರಾಜ್ಯ ಸಂಘದ ನಿರ್ದೇಶನದಂತೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯಮಟ್ಟದ ಅನಿರ್ಧಿಷ್ಟಾವಧಿ ಹೋರಾಟವನ್ನು ಮುಂದುವರೆಸಲಾಗುವುದು ಎಂದಿದ್ದಾರೆ.
ಹೋರಾಟದ ಅವಧಿಯಲ್ಲಿ ಗ್ರಾಮ ಪಂಚಾಯಿತಿಗಳ ಅತ್ಯಗತ್ಯ ಸೇವೆಗಳಾದ ಕುಡಿಯುವ ನೀರು ಪೂರೈಕೆ, ಬೀದಿದೀಪ ನಿರ್ವಹಣೆ ಮತ್ತು ನೈರ್ಮಲ್ಯ ಸೇವೆಗಳನ್ನು ಹೊರತುಪಡಿಸಿ, ಉಳಿದ ಯೋಜನೆಗಳು, ತಂತ್ರಾಂಶಗಳು, ಆಡಳಿತಾತ್ಮಕ ಕಾರ್ಯಗಳು ಹಾಗೂ ಹೆಚ್ಚುವರಿ ಜವಾಬ್ದಾರಿಗಳ ನಿರ್ವಹಣೆಯನ್ನು ಸ್ಥಗಿತಗೊಳಿಸಿ ಅಸಹಕಾರ ವ್ಯಕ್ತಪಡಿಸಲಾಗುವುದು. ಆದ್ದರಿಂದ, ರಾಜ್ಯದ ಎಲ್ಲ ಜಿಲ್ಲಾ ಘಟಕಗಳ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಹಮ್ಮಿಕೊಂಡಿರುವ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ ಮತ್ತು ಹೋರಾಟದ ಕುರಿತು ಸಂಘದ ಜಿಲ್ಲಾಧ್ಯಕ್ಷ ಸುಬ್ಬರಾಜ ಅರಸ್ ವಿ.ಆರ್. ಅವರು ಸಿಇಓರವರ ಗಮನಕ್ಕೆ ತಂದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ತೀರ್ಥ, ಸಂಘಟನಾ ಕಾರ್ಯದರ್ಶಿ ಚಂದ್ರಹಾಸ ಎಸ್.ಎಲ್., ಸಂಘಟನಾ ಕಾರ್ಯದರ್ಶಿ (ಮಹಿಳೆ) ಎ. ಕೋಕಿಲ, ಕ್ರೀಡಾ ಕಾರ್ಯದರ್ಶಿ ಸುನೀಲ್ಕುಮಾರ್ ಎನ್., ಸಾಂಸ್ಕೃತಿಕ ಕಾರ್ಯದರ್ಶಿ ವಿಜಯಲಕ್ಷ್ಮಿ ಆರ್. ಪಾಟೀಲ್, ಪ್ರಧಾನ ಕಾರ್ಯದರ್ಶಿ ತೇಜೇಶ್ ಜಿ., ಕಾರ್ಯಾಧ್ಯಕ್ಷ ಲೋಕೇಶ್ ಜಿ.ಮತ್ತಿತರರು ಪಾಲ್ಗೊಂಡಿದ್ದರು.
