ಮತದಾರರ ಪಟ್ಟಿ ಪರಿಷ್ಕರಣೆ; 18 ವರ್ಷ ಮೇಲ್ಪಟ್ಟವರು ಹೆಸರು ಸೇರ್ಪಡೆಗೆ ಅವಕಾಶ

1 min read

ಯುವ ಮತದಾರರ ನೋಂದಣಿ ಚುರುಕುಗೊಳಿಸಲು ಸೂಚನೆ

Tumkurnews
ತುಮಕೂರು; ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಜಿಲ್ಲಾದ್ಯಂತ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, 18 ವರ್ಷ ತುಂಬಿದ ಅರ್ಹ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದರು.
ಜಿಲ್ಲೆಯಲ್ಲಿ 18 ರಿಂದ 19 ವರ್ಷದೊಳಗಿನ ಯುವ ಮತದಾರರನ್ನು ಮತದಾರರ ಪಟ್ಟಿಗೆ ನೋಂದಾಯಿಸಲು ಸಹಾಯಕ ಚುನಾವಣಾ ನೋಂದಣಾಧಿಕಾರಿಗಳನ್ನು(ಎಇಆರ್’ಓ) ನೇಮಕ ಮಾಡಲಾಗಿದ್ದು, ಎಇಆರ್’ಓಗಳು ಪದವಿ ಪೂರ್ವ, ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಈವರೆಗೂ ಮತದಾರರ ಪಟ್ಟಿಗೆ ನೋಂದಾಯಿಸದ ಯುವ ಮತದಾರರನ್ನು ಪತ್ತೆ ಹಚ್ಚಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ನಿಯೋಜಿತ ಅಧಿಕಾರಿಗಳು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗಾಗಿ ಮನೆ-ಮನೆಗೆ ಭೇಟಿ ನೀಡಿ ಮರಣ ಹೊಂದಿದವರು, ಸ್ಥಳಾಂತರಗೊಂಡವರು, ಹೊಸ ಮತದಾರರ ನಿಖರ ಮಾಹಿತಿ ಪಡೆದು ಮತದಾರರ ಪಟ್ಟಿಯಲ್ಲಿ ಸೇರ್ಪಡೆ, ತೆಗೆದು ಹಾಕುವ, ತಿದ್ದುಪಡಿ ಮಾಡುವ ಕಾರ್ಯ ಮಾಡಬೇಕು. ಮರಣ ಹೊಂದಿದವರ ಹೆಸರನ್ನು ನಿರ್ಧಿಷ್ಟ ಮಾಹಿತಿ ಪಡೆದ ನಂತರವೇ ಪಟ್ಟಿಯಿಂದ ತೆಗೆದು ಹಾಕಬೇಕು ಎಂದು ನಿರ್ದೇಶನ ನೀಡಿದರು.
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸ್ವೀಕೃತವಾಗಿರುವ ಹಕ್ಕು ಮತ್ತು ಆಕ್ಷೇಪಣೆಗಳನ್ನು ಬಾಕಿ ಉಳಿಸಿಕೊಳ್ಳದೆ ತ್ವರಿತವಾಗಿ ವಿಲೇವಾರಿ ಮಾಡಬೇಕು, ಜಿಲ್ಲೆಯಲ್ಲಿರುವ ವಿಶೇಷಚೇತನ ಮತದಾರರನ್ನು ಪತ್ತೆ ಹಚ್ಚಿ ನೋಂದಣಿ ಮಾಡಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ ವಿದ್ಯಾಕುಮಾರಿ ಮಾತನಾಡಿ, ಸ್ವೀಪ್ ಕಾರ್ಯಕ್ರಮದಡಿ ಕಾಲೇಜುಗಳಲ್ಲಿ ಭಾರತ ಸಂವಿಧಾನ, ಮತದಾನದ ಮಹತ್ವ, ಮತದಾರರ ಪಟ್ಟಿಗೆ ಹೆಸರನ್ನು ನೋಂದಾಯಿಸುವ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಕಾಲೇಜು ಮುಖ್ಯಸ್ಥರು ತಮ್ಮ ವಿದ್ಯಾರ್ಥಿಗಳು ಮತದಾರರ ಪಟ್ಟಿಗೆ ನೋಂದಾಯಿಸಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.
ತಿಪಟೂರು ತಾಲ್ಲೂಕಿನಲ್ಲಿ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಇತ್ತೀಚೆಗೆ ಮೇಣದ ಬತ್ತಿ ಹಚ್ಚಿ ದೀಪ ಬೆಳಗಿಸುವ ಮೂಲಕ ವಿನೂತನ ರೀತಿಯಲ್ಲಿ ಜಾಗೃತಿ ಮೂಡಿಸಿದ ರೀತಿಯಲ್ಲಿ ಉಳಿದ ತಾಲ್ಲೂಕುಗಳಲ್ಲಿಯೂ ಹೊಸ ರೀತಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿ ಅರಿವು ಮೂಡಿಸಬೇಕು ಎಂದರು. ಜಿಲ್ಲೆಯಲ್ಲಿರುವ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿರುವ ಬಗ್ಗೆ ವೋಟರ್ ಹೆಲ್ಪ್ ಲೈನ್ ಮೊಬೈಲ್ ಆ್ಯಪ್ ಮೂಲಕ ಪರಿಶೀಲಿಸಿಕೊಳ್ಳಬೇಕು ಎಂದು ಇದೇ ವೇಳೆ ಜಿಲ್ಲಾಧಿಕಾರಿ ಮನವಿ ಮಾಡಿದರು.
ಸಭೆಯಲ್ಲಿ ಆಭಾ ಕಾರ್ಡ್ ವಿತರಣೆ, ಸ್ಮಶಾನ ಭೂಮಿ ಮಂಜೂರು, ವಸತಿ ಯೋಜನೆಯಡಿ ನಿವೇಶನ ಮಂಜೂರು, ಅಭಾ ಕಾರ್ಡ್ ವಿತರಣೆ, ಕೊವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕಾಕರಣ ಪ್ರಗತಿ ಸೇರಿಂತೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ, ಉಪವಿಭಾಗಾಧಿಕಾರಿ ಅಜಯ್, ಭೂದಾಖಲೆಗಳ ಇಲಾಖೆ ಉಪನಿರ್ದೇಶಕ ಸುಜಯ್, ಆರ್‍ಸಿಹೆಚ್ ಅಧಿಕಾರಿ ಡಾ.ಕೇಶವರಾಜ್, ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ. ಮೋಹನ್ ದಾಸ್, ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಸನತ್ ಕುಮಾರ್, ಆಹಾರ ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

About The Author

You May Also Like

More From Author

+ There are no comments

Add yours