ವಿಧಾನ ಸಭೆ ಚುನಾವಣೆಗೆ ದಿನಗಣನೆ; ಮತಗಟ್ಟೆಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಡಿಸಿ ಸೂಚನೆ

1 min read

 

 

 

 

 

Tumkurnews
ತುಮಕೂರು; ವಿಧಾನಸಭಾ ಕ್ಷೇತ್ರ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ಮತಗಟ್ಟೆಗಳಲ್ಲಿ ಕುಡಿಯುವ ನೀರು, ಶೌಚಾಲಯ, ಪೀಠೋಪಕರಣ, ವಿದ್ಯುತ್ ಸರಬರಾಜು, ರ್ಯಾಂಪ್ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ತುರ್ತಾಗಿ ಕಲ್ಪಿಸಬೇಕೆಂದು ಎಲ್ಲಾ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಅವರು ಮಾತನಾಡಿದರು. ಮತದಾರರು ಮತದಾನ ಮಾಡಲು ಅನುವಾಗುವಂತೆ ಮತಗಟ್ಟೆಗಳಲ್ಲಿ ಮೂಲ ಸೌಲಭ್ಯ ಇಲ್ಲದಿದಲ್ಲಿ ಕೂಡಲೇ ಒದಗಿಸಲು ಕಾರ್ಯಪ್ರವೃತ್ತರಾಗಬೇಕು. ಈ ಬಗ್ಗೆ ಒಂದು ವಾರದೊಳಗೆ ನಿಖರ ಮಾಹಿತಿ ನೀಡಬೇಕು, ಮುಂದಿನ 10 ದಿನಗಳೊಳಗೆ ಮತಗಟ್ಟೆಗಳಿಗೆ ಮೂಲ ಸೌಲಭ್ಯ ಒದಗಿಸದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ನೇರ ಹೊಣೆ ಮಾಡಲಾಗುವುದು ಎಂದು ಎಚ್ಚರಿಸಿದರು.
ಮತಗಟ್ಟೆಗಳು ಶಾಲೆಗಳಲ್ಲಿ ಸ್ಥಾಪನೆಯಾಗಿದ್ದರೆ ತಹಶೀಲ್ದಾರರು ಸೂಚಿಸುವ ಕೋಣೆಯನ್ನು ಮತದಾನಕ್ಕೆ ಬಿಟ್ಟುಕೊಡುವ ಬಗ್ಗೆ ಸಂಬಂಧಿಸಿದ ಶಾಲೆಗಳ ಮುಖ್ಯಸ್ಥರಿಗೆ ಸುತ್ತೋಲೆ ಹೊರಡಿಸಬೇಕೆಂದು ತುಮಕೂರು ಹಾಗೂ ಮಧುಗಿರಿಯ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತೆಗೆದು ಹಾಕುವ ಬಗ್ಗೆ ಸ್ವೀಕೃತ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿರುವ ಸರ್ಕಾರಿ ಶಾಲೆಯ ಜಮೀನುಗಳನ್ನು ಶಾಲೆಯ ಹೆಸರಿಗೆ ನೋಂದಣಿ, ಇ-ಸ್ವತ್ತು ಮಾಡಿಕೊಂಡು ತಹಶೀಲ್ದಾರ್ ಹಂತದಲ್ಲಿ 296 ಹಾಗೂ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗಳ ಹಂತದಲ್ಲಿ 264 ಸೇರಿದಂತೆ 560 ಪ್ರಕರಣಗಳು ಬಾಕಿ ಇದ್ದು, ಕೂಡಲೇ ಬಾಕಿ ಪ್ರಕರಣಗಳನ್ನು ವಿಲೇವಾರಿ ಮಾಡಬೇಕೆಂದು ನಿರ್ದೇಶನ ನೀಡಿದರು.
ಸ್ಮಶಾನ ಭೂಮಿ ಮಂಜೂರಾತಿಗೆ ಸಂಬಂಧಿಸಿದಂತೆ ಆಯಾ ಗ್ರಾಮಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳು ಭೌತಿಕವಾಗಿ ಪಂಚಾಯತಿ ವಶಕ್ಕೆ ಪಡೆದುಕೊಳ್ಳಬೇಕು ಎಂದು ಸೂಚಿಸಿದರು.
ಎಲ್ಲಾ ಸರ್ಕಾರಿ ಅಧಿಕಾರಿಗಳೂ ತಮ್ಮ ಕಚೇರಿ ಆವರಣದಲ್ಲಿ ಪ್ರತಿ ಮಾಹೆಯ ಮೊದಲನೆ ಶನಿವಾರ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡು ನೈರ್ಮಲ್ಯತೆ ಕಾಪಾಡುವಲ್ಲಿ ಇತರರಿಗೆ ಮಾದರಿಯಾಗಬೇಕು. ಕಾಲಕಾಲಕ್ಕೆ ಪಹಣಿಗಳನ್ನು ಅಪ್‍ಡೇಟ್ ಮಾಡಬೇಕು ಹಾಗೂ ಎಲ್ಲಾ ತಾಲ್ಲೂಕುಗಳಿಗೂ 1000 ಆಭಾ ಕಾರ್ಡ್ ವಿತರಣೆ ಮಾಡಲು ಗುರಿ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.
ಕಳೆದ ವಾರ ಫೆಬ್ರವರಿ 6ರಂದು ಗುಬ್ಬಿ ತಾಲ್ಲೂಕು ಬಿದರೆಹಳ್ಳ ಕಾವಲ್ ಹೆಲಿಕಾಪ್ಟರ್ ಉತ್ಪಾದನಾ ಘಟಕ ಲೋಕಾರ್ಪಣೆ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಕ್ರಮ ಯಶಸ್ವಿಗೊಳಿಸಲು ಪ್ರಮುಖ ಕಾರಣವಾದ ವಿವಿಧ ಇಲಾಖೆಗಳ ಅಧಿಕಾರಿಗಳ ತಂಡಕ್ಕೆ ಅಭಿನಂದನೆ ಸಲ್ಲಿಸಿದರು. ನಿರೀಕ್ಷೆಗಿಂತ ಕಾರ್ಯಕ್ರಮ ಯಶಸ್ವಿಯಾಗಿದ್ದಕ್ಕೆ ಮುಖ್ಯಮಂತ್ರಿ ಹಾಗೂ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳೂ ಸಹ ಜಿಲ್ಲಾಡಳಿತದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.
ಉಳಿದಂತೆ ಸಭೆಯಲ್ಲಿ ತಸ್ತಿಕ್ ಅನುದಾನ ಹಾಗೂ ಎಸ್‍ಸಿಪಿ, ಟಿಎಸ್‍ಪಿ ವಿಶೇಷ ಅನುದಾನ ಖರ್ಚು ಮಾಡುವ, ಸಾಮಾಜಿಕ ಭದ್ರತಾ ಪಿಂಚಣಿ, ಭೂಮಿ ಪೆಂಡೆನ್ಸಿ, ಆರ್‍ಟಿಸಿ ಇಂದೀಕರಣ, ಆರ್‍ಆರ್‍ಟಿ ತಿದ್ದುಪಡಿ, ನಾಡಕಚೇರಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೊಬೈಲ್ ಆ್ಯಪ್ ಮೂಲಕ ಖಾಸಗಿ ಪ್ರತಿನಿಧಿಗಳು ಕೈಗೊಂಡಿದ್ದ ಬೆಳೆ ಸಮೀಕ್ಷೆಯಲ್ಲಿ ಬಹುವಾರ್ಷಿಕ ಬೆಳೆ ವಿವರವನ್ನು ದಾಖಲಿಸುವಲ್ಲಿ ಹಲವು ಲೋಪಗಳು ಕಂಡು ಬಂದಿರುವುದರಿಂದ ಸದರಿ ಲೋಪಗಳನ್ನು ಸರಿಪಡಿಸಲು ತೋಟಗಾರಿಕೆ, ರೇಷ್ಮೆ, ಕೃಷಿ ಇಲಾಖೆಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ನಿಯೋಜಿತ ಅಧಿಕಾರಿಗಳು ಕ್ಷೇತ್ರಗಳಿಗೆ ಭೇಟಿ ನೀಡಿ ಹಿಂದಿನ ಮೂರು ವರ್ಷಗಳಲ್ಲಿ ಬೆಳೆ ಸಮೀಕ್ಷೆಯಲ್ಲಿ ದಾಖಲಾಗಿರುವ ಎಲ್ಲಾ ಬಹುವಾರ್ಷಿಕ ಬೆಳೆಗಳ ತಾಕುಗಳನ್ನು ಪರಿಶೀಲಿಸಿ ದೃಢೀಕರಿಸಬೇಕೆಂದು ಸೂಚನೆ ನೀಡಿದರು.
ಜಿಪಂ ಸಿಇಒ ಡಾ.ಕೆ. ವಿದ್ಯಾಕುಮಾರಿ ಮಾತನಾಡಿ, ಕಳೆದ 2018, 2019ರ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಿ ಕಡಿಮೆ ಮತದಾನಕ್ಕೆ ಕಾರಣವೇನೆಂದು ಅಧ್ಯಯನ ಮಾಡಬೇಕು. ಈವರೆಗೂ ಮತದಾರರ ಪಟ್ಟಿಯಲ್ಲಿ ನೋಂದಾಯಿಸದಿರುವ ಮತದಾರರು, ಯುವ ಮತದಾರರ ಮಾಹಿತಿ ಪಡೆದು ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಅರಿವು ಮೂಡಿಸಬೇಕು. ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಂಡು ಮತದಾನದ ಬಗ್ಗೆ ಜಾಗೃತಿ ಮೂಡಿಸಬೇಕು, ಮತಗಟ್ಟೆ ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಅರ್ಹ ಮತದಾರರ ವಾಟ್ಸಪ್ ಗ್ರೂಪ್ ರಚಿಸಿ ಚುನಾವಣೆ ಸಂಬಂಧಿತ ಮಾಹಿತಿಯನ್ನು ಹಂಚಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಅಂಕಿ-ಅಂಶದ ಆಧಾರದನ್ವಯ ಜಿಲ್ಲೆಯಲ್ಲಿ ಸುಮಾರು 43000 ಯುವ ಮತದಾರರಿದ್ದು, ಈವರೆಗೂ 36000 ಯುವ ಮತದಾರರು ಮಾತ್ರ ಮತದಾರರ ಪಟ್ಟಿಗೆ ನೋಂದಾಯಿಸಿಕೊಂಡಿದ್ದಾರೆ. ಉಳಿದ ಯುವ ಮತದಾರರನ್ನು ನೋಂದಾಯಿಸಲು ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಯುವ ಮತದಾರರು ನೋಂದಣಿಯಾಗುವಂತೆ ಕ್ರಮವಹಿಸಬೇಕೆಂದು ತಿಳಿಸಿದರು.

ಉನ್ನತ ಶಿಕ್ಷಣದ ಕನಸು ಕಂಡವರಿಗೆ ಮುಕ್ತ ವಿಶ್ವವಿದ್ಯಾನಿಲಯ ಸಿಹಿ ಸುದ್ದಿ!
ಸಭೆಯ ನಂತರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಡಾ. ಆರ್. ಲೋಕೇಶ್ ಮಾತನಾಡಿ, ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ ಎಂಬ ಘೋಷವಾಕ್ಯದಂತೆ ಉನ್ನತ ಶಿಕ್ಷಣ ವಂಚಿತ ವಿದ್ಯಾರ್ಥಿಗಳಿಗೆ ದೂರ ಶಿಕ್ಷಣ ನೀಡುವಲ್ಲಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಮುಂಚೂಣಿಯಲ್ಲಿದೆ. ನೌಕರಿಯಲ್ಲಿರುವವರು ಸಹ ಪದೋನ್ನತಿ, ಜ್ಞಾನಾರ್ಜನೆಗಾಗಿ ದೂರ ಶಿಕ್ಷಣದ ಮೂಲಕ ಪದವಿ ಹೊಂದಬಹುದಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿ ವರ್ಗದವರು ತಮ್ಮ ಅಧೀನ ಸಿಬ್ಬಂದಿಗಳಿಗೆ ದೂರ ಶಿಕ್ಷಣದ ಮೂಲಕ ವಿವಿಧ ಪದವಿ ಕೋರ್ಸುಗಳಿಗೆ ಪ್ರವೇಶ ಪಡೆಯಲು ಮಾಹಿತಿ ನೀಡಬೇಕೆಂದು ಮನವಿ ಮಾಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಉಪವಿಭಾಗಾಧಿಕಾರಿ ಶಿವಪ್ಪ, ತಹಶೀಲ್ದಾರ್ ಸಿದ್ದೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಂಜುನಾಥ್, ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ.ವೀಣಾ, ಡಾ. ಮೋಹನ್ ದಾಸ್, ಡಾ.ಸನತ್ ಕುಮಾರ್, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಅತಿಕ್ ಪಾಷ ಸೇರಿದಂತೆ ಮತ್ತಿತರರು ಹಾಜರಿದ್ದರು.

ಮಾರ್ಚ್’ನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ ಸಾಧ್ಯತೆ; ಸರ್ಕಾರಿ ಕಾಮಗಾರಿಗಳಿಗೆ ವೇಗ

You May Also Like

More From Author

+ There are no comments

Add yours