ತುಮಕೂರು: ನೀರು ದುರ್ಬಳಕೆ ಮಾಡಿದರೆ ಕಾನೂನು ಕ್ರಮ!: ಏನಿದು ಸುದ್ದಿ? ಓದಿ

1 min read

 

 

 

 

 

ಕುಡಿಯುವ ನೀರು ದುರ್ಬಳಕೆ ಮಾಡಿದವರ ಮೇಲೆ ಕಾನೂನು ಕ್ರಮ ಜರುಗಿಸಲು ಸೂಚನೆ

Tumkurnews
ತುಮಕೂರು: ಕುಡಿಯುವ ಉದ್ದೇಶಕ್ಕಾಗಿ ಕೆರೆಗಳನ್ನು ತುಂಬಿಸಲು ಹೇಮಾವತಿ ನಾಲೆ ನೀರನ್ನು ಜಿಲ್ಲೆಗೆ ಹರಿಸಿದ್ದು, ನಾಲೆ ನೀರನ್ನು ದುರ್ಬಳಕೆ ಮಾಡಿದವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತುಮಕೂರು: ತಿಲಕ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ನಾಪತ್ತೆ
ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಮಂಗಳವಾರ ರಾತ್ರಿ ಜಿಲ್ಲೆಯಲ್ಲಿ ಬರ ನಿರ್ವಹಣೆ ಹಾಗೂ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ತುರ್ತು ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಅವರು ಮಾತನಾಡಿದರು.
ಹೇಮಾವತಿ ನಾಲೆ ನೀರನ್ನು ಅಕ್ರಮವಾಗಿ ಡಿಸೇಲ್ ಪಂಪ್‍ನಿಂದ ಬಳಸಿಕೊಳ್ಳುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಅಕ್ರಮವಾಗಿ ಬಳಸಿಕೊಳ್ಳುವವರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ತಹಶೀಲ್ದಾರ್’ಗೆ ನಿರ್ದೇಶನ ನೀಡಿದರು.

ತುಮಕೂರು ಜಿಲ್ಲೆಗೆ ಹೇಮಾವತಿ ನೀರು ಹರಿಸಿದಕ್ಕೆ ಹಾಸನದಲ್ಲಿ ಜೆಡಿಎಸ್ ತೀವ್ರ ಪ್ರತಿಭಟನೆ: ವಿಡಿಯೋ
ಕುಡಿಯುವ ನೀರಿಗಾಗಿ ಮಾತ್ರ ನಾಲೆ ನೀರನ್ನು ಬಳಸಿಕೊಳ್ಳಬೇಕು. ಕೃಷಿ ಮತ್ತಿತರ ಚಟುವಟಿಕೆಗಳಿಗೆ ಅಕ್ರಮವಾಗಿ ಬಳಸಿಕೊಳ್ಳುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು, ನಾಲೆ ನೀರನ್ನು ಶುದ್ಧೀಕರಿಸಿದ ನಂತರ ಜನರಿಗೆ ಪೂರೈಕೆ ಮಾಡುವ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆಗೊಳಪಡಿಸಿ ಕುಡಿಯಲು ಯೋಗ್ಯವಿದ್ದರೆ ಮಾತ್ರ ಪೂರೈಕೆ ಮಾಡಬೇಕೆಂದು ನಿರ್ದೇಶನ ನೀಡಿದರು.
ದಿನೇ ದಿನೆ ತಾಪಮಾನ ಹೆಚ್ಚಾಗುತ್ತಿರುವುದರಿಂದ ಜನರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಮಾನವೀಯ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು. ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ತಲೆ ತೋರದಂತೆ ಕ್ರಮಕೈಗೊಳ್ಳಬೇಕು. ಚುನಾವಣಾ ಕರ್ತವ್ಯದೊಂದಿಗೆ ಬರ ಪರಿಸ್ಥಿತಿಯನ್ನೂ ಸಹ ನಿರ್ವಹಿಸಬೇಕು. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಆಯಾ ಉಪ ವಿಭಾಗಾಧಿಕಾರಿಗಳು ತಮ್ಮ ವ್ಯಾಪ್ತಿಯ ತಾಲ್ಲೂಕುಗಳಲ್ಲಿ ಕಡ್ಡಾಯವಾಗಿ ತಾಲ್ಲೂಕು ಮಟ್ಟದ ಕಾರ್ಯಪಡೆ ಸಭೆಯನ್ನು ನಡೆಸಿ ಸಮಸ್ಯೆಯನ್ನು ಬಗೆಹರಿಸಲು ಕ್ರಮವಹಿಸಬೇಕು ಎಂದು ಸೂಚಿಸಿದರು. ಬೇಸಿಗೆ ಮುಗಿಯುವವರೆಗೂ ನೀರಿನ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳ ಅಂದಾಜು ಪಟ್ಟಿ ಸಿದ್ಧಪಡಿಸಬೇಕು. ತೀವ್ರತರ ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ ಕೂಡಲೇ ಹೊಸ ಕೊಳವೆ ಬಾವಿ ಕೊರೆಸಲು ಮುಂದಾಗಬೇಕು. ಹೊಸದಾಗಿ ಕೊರೆದ ಕೊಳವೆಬಾವಿಗಳನ್ನು ಹಾಗೆ ಬಿಡದೆ ತತ್‍ಕ್ಷಣವೇ ವಿದ್ಯುದ್ದೀಕರಣಗೊಳಿಸಿ ಪಂಪು-ಮೋಟಾರು, ಪೈಪ್‍ಲೈನ್ ಅಳವಡಿಸಬೇಕು. ಸಂಬಂಧಿಸಿದ ತಹಶೀಲ್ದಾರರು, ಕಂದಾಯ ನಿರೀಕ್ಷಕರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಹಾಗೂ ಜಾನುವಾರು ಮೇವಿನ ಸಮಸ್ಯಾತ್ಮಕ ಗ್ರಾಮಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ಸೂಚನೆ ನೀಡಿದರು. ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ವೀಕೃತವಾದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಬಾಕಿ ಉಳಿಸಿಕೊಳ್ಳದೆ ಕೂಡಲೇ ವಿಲೇವಾರಿ ಮಾಡಬೇಕು. ಚೆಕ್ ಪೋಸ್ಟ್’ಗಳಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಪತ್ತೆ ಕಾರ್ಯಾಚರಣೆಯನ್ನು ಚುರುಕುಗೊಳಿಸಬೇಕು. ಚುನಾವಣಾ ಅಕ್ರಮಗಳನ್ನು ತಡೆಯಲು ಸ್ಥಾಪಿಸಿರುವ ಚೆಕ್‍ಪೋಸ್ಟ್’ಗಳಲ್ಲಿ ಕುಡಿಯುವ ನೀರು, ಬೆಳಕಿನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದರು. ಲೋಕಸಭಾ ಕ್ಷೇತ್ರ ಚುನವಾಣೆಗೆ ಸಂಬಂಧಿಸಿದಂತೆ ಅಂಚೆ ಮತದಾನ ಮಾಡಲಿಚ್ಛಿಸುವ ಜಿಲ್ಲೆಯ 85+ ಹಾಗೂ ವಿಕಲಚೇತನರಿಗೆ ನಮೂನೆ 12ಡಿಯನ್ನು ವಿತರಿಸುವ ಕಾರ್ಯವನ್ನು ಪ್ರಾರಂಭಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ತಾಲ್ಲೂಕುವಾರು ಬರ ಪರಿಸ್ಥಿತಿಯನ್ನು ಪರಿಶೀಲಿಸುತ್ತಾ, ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮ, ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿರುವ ಗ್ರಾಮ, ಬಾಡಿಗೆ ಆಧಾರದ ಮೇಲೆ ಕೊಳವೆ ಬಾವಿ ನೀರು ಪಡೆದು ಪೂರೈಕೆ ಮಾಡುತ್ತಿರುವ ಗ್ರಾಮಗಳು ಹಾಗು ಹೊಸದಾಗಿ ಕೊರೆದಿರುವ ಕೊಳವೆಬಾವಿಗಳ ಮಾಹಿತಿ ಪಡೆದರು. ಚುನಾವಣೆ ಕರ್ತವ್ಯದ ನೆಪ ಹೇಳಿ ಬರ ನಿರ್ವಹಣೆ ಕಾರ್ಯದಿಂದ ತಪ್ಪಿಸಿಕೊಳ್ಳುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮವಹಿಸಲಾಗುವುದು. ಎರಡೂ ಕಾರ್ಯಗಳನ್ನು ಆದ್ಯತೆ ಮೇಲೆ ನಿರ್ವಹಿಸಬೇಕು. ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಹಶೀಲ್ದಾರರು ಸಮನ್ವಯತೆಯಿಂದ ಜನರಿಂದ ದೂರು ಬಾರದಂತೆ ಕುಡಿಯುವ ನೀರಿನ ಬವಣೆಯನ್ನು ನಿವಾರಿಸುವ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಹೊಸದಾಗಿ ಕೊಳವೆ ಬಾವಿ ಕೊರೆಯುವ ಮುನ್ನ ಸಮಿತಿಯಿಂದ ಅನುಮೋದನೆ ಪಡೆಯಬೇಕು. ಅನುಮತಿಯಿಲ್ಲದೆ ಏಕಾಏಕಿ ಕೊರೆಸುವ ಕೊಳವೆ ಬಾವಿಗೆ ತಗಲುವ ವೆಚ್ಚದ ಬಿಲ್ಲಿನ ಪಾವತಿಗೆ ಅವಕಾಶ ನೀಡುವುದಿಲ್ಲ ಎಂದರಲ್ಲದೆ ಅನುಮೋದನೆ ಪಡೆಯದೆ ಕೊರೆದ ಬೋರ್‍ವೆಲ್‍ಗಳ ವೆಚ್ಚವನ್ನು ಅಧಿಕಾರಿಗಳ ವೇತನದಿಂದಲೇ ಕಟಾಯಿಸಲು ಕ್ರಮ ಕೈಗೊಳ್ಳಲಾಗುವುದೆಂದರು.

ತೀವ್ರತರ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಕೊರೆಯಲಾಗಿರುವ ಹೊಸ ಕೊಳವೆ ಬಾವಿಗಳಿಗೆ ಬತ್ತಿ ಹೋಗಿರುವ ಕೊಳವೆ ಬಾವಿಗಳ ಪಂಪು ಮೋಟಾರ್‌ಗಳನ್ನೇ ಬಳಸಬೇಕು. ಮತ್ತೊಮ್ಮೆ ಹೊಸ ಪಂಪು ಮೋಟಾರ್ ಅಳವಡಿಸಿದರೆ ಅಂಥವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಹೇಳಿದರು.

ಆಶ್ರಯ ವಸತಿ ಯೋಜನೆಯಡಿ ನಿವೇಶನ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಲು ಈಗಾಗಲೇ ಜಿಲ್ಲೆಯಲ್ಲಿ 1639-26 ಎಕರೆ ಜಮೀನನ್ನು ಗುರುತಿಸಿ ಜಿಲ್ಲಾಧಿಕಾರಿಗಳಿಂದ ಮಂಜೂರಾತಿ ಆದೇಶ ದೊರೆತಿದ್ದು, 951.14 ಎಕರೆ ಪ್ರದೇಶವನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಗಿದೆ. ಹಸ್ತಾಂತರವಾದ ಜಮೀನನ್ನು ಬಡಾವಣೆಗಳನ್ನಾಗಿ ನಿರ್ಮಿಸಲು ಸಂಬಂಧಿಸಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ನಗರ ಯೋಜನಾ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕೆಂದು ನಿರ್ದೇಶನ ನೀಡಿದರು.
ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ರವೀಶ್ ಮಾತನಾಡಿ, ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 121 ಗ್ರಾಮಗಳನ್ನು ಸಮಸ್ಯಾತ್ಮಕ ಗ್ರಾಮಗಳೆಂದು ಗುರುತಿಸಲಾಗಿದ್ದು, ಈ ಪೈಕಿ 14 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಹಾಗೂ 31 ಗ್ರಾಮಗಳಲ್ಲಿ ಬಾಡಿಗೆ ಆಧಾರದ ಮೇಲೆ ಖಾಸಗಿ ಕೊಳವೆ ಬಾವಿಗಳಿಂದ ನೀರು ಪೂರೈಕೆ ಮಾಡಲಾಗುತ್ತಿದೆ. ಕುಡಿಯುವ ನೀರಿನ ತೀವ್ರತರ ಸಮಸ್ಯೆ ಕಂಡು ಬಂದಿರುವ ಗ್ರಾಮಗಳಲ್ಲಿ ಹೊಸದಾಗಿ 60 ಕೊಳವೆ ಬಾವಿಗಳನ್ನು ಕೊರೆಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜನಪ್ಪ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

You May Also Like

More From Author

+ There are no comments

Add yours